ಆವ ಸಿರಿಯಲಿ ನೀನು

ರಚನೆಕಾರ: ಕನಕದಾಸರು

ವರ್ಗ: ಶ್ರೀರಾಮ

ಆವ ಸಿರಿಯಲಿ ನೀನು ಎನ್ನ ಮರೆತೆ?
ದೇವ ಜಾನಕಿರಮಣ ಪೇಳು ರಘುಪತಿಯೆ || ಪ ||

ಸುರರ ಸೆರೆಯನು ಬಿಡಿಸಿ ಬಂದನೆಂಬಾ ಸಿರಿಯೆ
ಕರಿ ಮೊರೆಯ ಲಾಲಿಸಿದೆನೆಂಬ ಸಿರಿಯೆ?
ಶರಧಿ ಸೇತುವೆಯ ಕಟ್ಟಿದೆನೆನ್ನುವಾ ಸಿರಿಯೆ
ಸ್ಥಿರವಾಗಿ ಹೇಳೆನಗೆ ಹೇಳು ರಘುಪತಿಯೆ || ೧ ||

ಕಡಲೊಳಗೆ ಮನೆ ಮಾಡಿ ಮಲಗಿದೆನೆಂಬಾ ಸಿರಿಯೆ
ಮೃಡ ನಿನ್ನ ಸಖನಾದನೆಂಬ ಸಿರಿಯೆ?
ಬಿಡದೆ ದ್ರೌಪದಿ ಮಾನ ಕಾಯ್ದನೆಂಬ ಸಿರಿಯೆ
ದೃಢವಾಗಿ ಹೇಳೆನಗೆ ದೇವಕೀಸುತನೆ || ೨ ||

ಭೂಮಿಯನು ಮೂರಡಿಯ ಮಾಡಿದೆನೆಂಬ ಸಿರಿಯೆ
ಕಾಮ ನಿನ್ನ ಸುತನಾದನೆಂಬ ಸಿರಿಯೆ
ಆ ಮಹಾಲಕುಮಿ ನಿನ್ನ ಸತಿಯಾದಳೆಂಬ ಸಿರಿಯೆ
ಪ್ರೇಮದಲಿ ಹೇಳೆನಗೆ ಸ್ವಾಮಿ ಅಚ್ಯುತನೆ || ೩ ||

ಮನುಜರೆಲ್ಲರು ನಿನ್ನ ಸ್ತುತಿಸುವರೆಂಬ ಸಿರಿಯೆ
ಹನುಮ ನಿನ್ನ ಬಂಟನಾದೆನೆಂಬ ಸಿರಿಯೆ
ಬಿನುಗು ದೈವಗಳು ನಿನಗೆಣೆಯಿಲ್ಲವೆಂಬ ಸಿರಿಯೆ
ಅನುಮಾನ ಮಾಡದೆ ಪೇಳೋ ನರಹರಿಯೆ || ೪ ||

ಇಂತು ಸಿರಿಯಲಿ ನೀನು ಎನ್ನ ಮರೆತರೆ ಸ್ವಾಮಿ
ಪಂಥವೇ ನಿನಗಿದು ಆವಾ ನಡತೆ
ಕಂತುಪಿತ ಕಾಗಿನೆಲೆಯಾದಿಕೇಶವ ರಂಗ
ಚಿಂತೆಯನು ಬಿಡಿಸಿ ಸಂತೋಷಪಡಿಸೊ || ೫ ||