ಏಳು ನಾರಾಯಣ ಏಳು ಲಕ್ಷ್ಮೀರಮಣ

ರಚನೆಕಾರ: ಕನಕದಾಸರು

ವರ್ಗ: ಶ್ರೀನಿವಾಸ

ಏಳು ನಾರಾಯಣ ಏಳು ಲಕ್ಷ್ಮೀರಮಣ || ಪ ||

ಏಳು ಶ್ರೀಗಿರಿಗೊಡೆಯ ಶ್ರೀವೆಂಕಟೇಶ
ಏಳಯ್ಯ ಬೆಳಗಾಯಿತು || ಅ.ಪ ||

ಕಾಸಿದ್ದ ಹಾಲನ್ನು ಕಾವಡಿಯೊಳು ಹೆಪ್ಪಿಟ್ಟು
ಲೇಸಾಗಿ ಕಡೆದು ಹೊಸಬೆಣ್ಣೆ ಕೊಡುವೆ
ಶೇಷಶಯನನೆ ಏಳು ಸಮುದ್ರಮಂಥನವ ಮಾಡು
ದೇಶ ಕೆಂಪಾಯಿತು ಏಳಯ್ಯ ಹರಿಯೇ || ೧ ||

ಅರಳು ಮಲ್ಲಿಗೆ ಜಾಜಿ ಪರಿಮಳದ ಪುಷ್ಪಗಳ
ಸುರರು ತಂದಿದ್ದಾರೆ ಬಲು ಭಕುತಿಯಿಂದ
ಅರವಿಂದನಾಭ ಸಿರಿವಿಧಿಭವಾದಿಗಳೊಡೆಯ
ಹಿರಿದಾಗಿ ಕೋಳಿ ಕೂಗಿತೇಳಯ್ಯ ಹರಿಯೇ || ೨ ||

ದಾಸರೆಲ್ಲರು ಬಂದು ಧೂಳಿನ ದರ್ಶನಕೊಂಡು
ಲೇಸಾಗಿ ತಾಳ ದಂಡಿಗೆಯ ಪಿಡಿದು
ಶ್ರೀಶ ಕಾಗಿನೆಲೆಯಾದಿಕೇಶವ ನಿಮ್ಮ ಪಾದವನು
ಲೇಸಾಗಿ ಸ್ಮರಿಸಿ ಪೊಗಳುವರು ಹರಿಯೇ || ೩ ||