ಯಾಕೆ ನೀನಿಲ್ಲಿ ಪವಡಿಸಿದೆ ಹರಿಯೆ

ರಚನೆಕಾರ: ಕನಕದಾಸರು

ವರ್ಗ: ವಿಷ್ಣು

ಯಾಕೆ ನೀನಿಲ್ಲಿ ಪವಡಿಸಿದೆ ಹರಿಯೆ – ಜಗ
ದೇಕ ವಿಖ್ಯಾತ ಪಶ್ಚಿಮ ರಂಗಧಾಮ || ಪ ||

ತಮನೊಡನೆ ಹೋರಿ ಬೆಟ್ಟವನು ಬೆನ್ನಲಿ ಪೊತ್ತು
ರಮಣಿ ಭೂಮಿಯನು ತಂದಾಯಾಸವೊ
ಅಮರವೈರಿಯ ಕರುಳ ಕಿತ್ತ ಕಡು ಧಾವತಿಯೊ
ಕ್ಷಮೆಯನಳೆದೀ ಪಾದಕಮಲ ನೊಂದವೊ || ೧ ||

ಪೊಡವಿಪಾಲಕರ ವಂಶವನು ವಪನ ಮಾಡಿ
ಕೊಡಲಿಯನು ಬಿಸುಟು ಮಲಗಿದ ಭಾವವೊ
ಮಡದಿಯನು ಕದ್ದೊಯ್ದವನ ಶಿರವನೆ ತರಿದು
ಒಡಲಿನಾಯಾಸದಲಿ ಪವಡಿಸಿದ ಪರಿಯೊ || ೨ ||

ವಾಲಿ ಮೊದಲಾದ ಎದುರಾಂತ ವೀರರ ಕೊಂದು
ಕಾಳಿಯ ಹೆಡೆಯ ತುಳಿತುಳಿದು ಮೈಯಲಸಿತೊ
ಲೀಲೆಗೋಸುಗ ಬಂದು ನಿರ್ವಾಣದಲಿ ನಿಂದು
ಆ ಲಜ್ಜೆಗಾಗಿ ತಲೆ ಬಾಗಿ ಮಲಗಿದೆಯೊ || ೩ ||

ನಾಲ್ಕು ಯುಗದಾಧಾರಿ ಕಡೆಗೆ ತುರಗವನೇರಿ
ಸಾಕಾಗಿ ದಣಿದು ನೀನಿಲ್ಲಿ ಮಲಗಿದೆಯೊ
ಸಾಕಾರಿಯಾಗಿ ಗೌತಮ ಮುನೀಶ್ವರನಿಗೆ
ಬೇಕೆಂದು ನೀ ಕೊಟ್ಟ ವರಕೆ ಮಲಗಿದೆಯೊ || ೪ ||

ಇನ್ನೆಷ್ಟು ಕಾಲ ನೀನಿಲ್ಲಿ ಮಲಗಿದ್ದರೂ
ನಿನ್ನನೆಬ್ಬಿಸುವವರನೊಬ್ಬರನು ಕಾಣೆ
ಉನ್ನಂತ ಕಾಗಿನೆಲೆಯಾದಿಕೇಶವರಾಯ
ಚೆನ್ನ ಶ್ರೀರಂಗಪಟ್ಟಣದ ರಂಗಧಾಮ || ೫ ||